ಪ್ರಾದೇಶಿಕ ಅಸಮತೋಲನ (Regional imbalances) ಬಗ್ಗೆ ಪ್ರಾದೇಶಿಕ ಅಸಮತೋಲನ ನಿವಾರಣಾ ಉನ್ನತ ಅಧಿಕಾರ ಸಮಿತಿ ಸದಸ್ಯರಾದ ಎಂ.ಎಚ್.ಸೂರ್ಯನಾರಾಯಣ ಅವರು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಹಾಗೂ ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳ ಜತೆ ಸುಧೀರ್ಘ ಚರ್ಚೆ ನಡೆಸಿದರು. ನಗರದ ಜಿ.ಪಂ.ಕೆಡಿಪಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಕರ್ನಾಟಕದಲ್ಲಿ ಪ್ರಾದೇಶಿಕ ಅಸಮತೋಲನ ಮರು ಪರಿಶೀಲನೆ ಸಂಬಂಧಿಸಿದಂತೆ ಮಾಹಿತಿ ಪಡೆದರು.
ನಂಜುಂಡಪ್ಪ ವರದಿಯಂತೆ ಜಿಲ್ಲೆ ಜಿಲ್ಲೆಗಳ ನಡುವೆ ಶಿಕ್ಷಣ, ಆರೋಗ್ಯ, ಉದ್ಯೋಗ, ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿ, ಕೃಷಿ, ಕೈಗಾರಿಕೆ, ಮತ್ತಿತರ ಸಂಬಂಧ ಅಸಮತೋಲನ ನಿವಾರಣೆ ಬಗ್ಗೆ ಮಾಹಿತಿ ಪಡೆದರು. ನಂಜುಂಡಪ್ಪ ವರದಿಯಂತೆ ರಾಜ್ಯದಲ್ಲಿ ಹಿಂದಿನ ಬಾಂಬೆ ಪ್ರೆಸಿಡೆನ್ಸಿ, ಹೈದರಾಬಾದ್ ಕರ್ನಾಟಕ, ಕೊಡಗು ಮತ್ತು ಹಳೇ ಮದ್ರಾಸ್ ಪ್ರೆಸಿಡೆನ್ಸಿಗೆ ಸೇರಿದ ಜಿಲ್ಲೆಗಳು ವಿಭಿನ್ನತೆಯಿಂದ ಕೂಡಿವೆ. ಈ ಪ್ರದೇಶದಲ್ಲೂ ಅಂತರ್ ಜಿಲ್ಲಾ ಅಸಮತೋಲನತೆ ಇವೆ ಎಂದು ನಂಜುಂಡಪ್ಪ ವರದಿ ನೀಡಿದ್ದು, ಸಮಿತಿಯು ಅಂತಹ ಅಸಮತೋಲನೆ ಹಾಗೂ ವಿಶೇಷವಾಗಿ ಕರ್ನಾಟಕದ ದಕ್ಷಿಣ ಮತ್ತು ಉತ್ತರ ನಡುವಿನ ಅಸಮಾನತೆ ನಿವಾರಣೆ ಮಾಡಬೇಕಿದೆ ಎಂದರು.
ಅಭಿವೃದ್ಧಿ ಸೂಚ್ಯಂಕಗಳಲ್ಲಿ ಅಂತರ್ ಜಿಲ್ಲಾ ಮತ್ತು ಅಂತರ ಪ್ರಾದೇಶಿಕ ಅಸಮಾನತೆಗಳನ್ನು ಕಡಿಮೆ ಮಾಡಲು ಇತರೆ ಜಿಲ್ಲೆಗಳಿಗಿಂತ ಹಿಂದುಳಿದಿರುವ ಜಿಲ್ಲೆಗಳು/ಪ್ರದೇಶಗಳ ಅಭಿವೃದ್ಧಿಗೆ ಸೂಕ್ತ ಕಾರ್ಯತಂತ್ರವನ್ನು ಸೂಚಿಸುವಂತೆ ನಂಜುಂಡಪ್ಪ ಸಮಿತಿಯಲ್ಲಿ ತಿಳಿಸಲಾಗಿದೆ ಎಂದರು. ಕೃಷಿ, ತೋಟಗಾರಿಕೆ, ಆಹಾರ ಧಾನ್ಯ ಬೆಳೆಯುವ ಪ್ರದೇಶ, ವಾಣಿಜ್ಯ ಬೆಳೆಗಳ ಪ್ರದೇಶ, ನಿವ್ವಳ ಭಿತ್ತನೆ ಪ್ರದೇಶ, ಪ್ರತೀ ಹೆಕ್ಟೇರ್ಗೆ ರಸಗೊಬ್ಬರ, ಪ್ರತೀ ಲಕ್ಷ ಜನಸಂಖ್ಯೆಗೆ ಟ್ರಾಕ್ಟರ್ಗಳ ಸಂಖ್ಯೆ, ಪ್ರತೀ ಲಕ್ಷ ಗ್ರಾಮೀಣ ಜನಸಂಖ್ಯೆಗೆ ಲೈವ್ ಸ್ಟಾಕ್ ಘಟಕಗಳು, ಕೃಷಿಗೆ ತಲಾ ಬ್ಯಾಂಕ್ ಸಾಲ, ಹೀಗೆ ಹಲವು ಅಂಶಗಳನ್ನು ಒಳಗೊಂಡಿದೆ ಎಂದು ಸೂರ್ಯನಾರಾಯಣ ಅವರು ವಿವರಿಸಿದರು.
ಕೈಗಾರಿಕೆ, ವ್ಯಾಪಾರ ಮತ್ತು ಹಣಕಾಸು, ಹೋಟೆಲ್, ಸಾರಿಗೆ ಸಂಪರ್ಕ, ಉದ್ಯಮ, ಅಂಚೆ ಕಚೇರಿ, ದೂರವಾಣಿ ಸಂಪರ್ಕ, ವಿದ್ಯುದ್ದೀಕರಣ, ಕೃಷಿ ಹಾಗೂ ಕೃಷಿಯೇತರ, ಮಾರುಕಟ್ಟೆ, ಸಾಕ್ಷರತೆ ಪ್ರಮಾಣ, ಆಸ್ಪತ್ರೆ, ಕುಡಿಯುವ ನೀರಿನ ಸಂಪರ್ಕ, ಲಿಂಗಾನುಪಾತ, ನಗರ ಹಾಗೂ ಗ್ರಾಮೀಣ ಜನಸಂಖ್ಯೆ, ಕಾರ್ಮಿಕರ ಸ್ಥಿತಿಗತಿ, ಹೀಗೆ ನಂಜುಂಡಪ್ಪ ವರದಿಯಲ್ಲಿ ಸಂವೇದಿತ ಸೂಚ್ಯಂಕಗಳನ್ನು ತಿಳಿಸಲಾಗಿದೆ ಎಂದರು.
ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಮಾತನಾಡಿ ಪ್ರಾದೇಶಿಕ ಅಸಮತೋಲನ ನಿವಾರಣೆ ಸಂಬಂಧಿಸಿದಂತೆ ಶಿಕ್ಷಣ, ಆರೋಗ್ಯ, ಉದ್ಯೋಗ, ಕೃಷಿ, ತೋಟಗಾರಿಕೆ, ವ್ಯಾಪಾರ ವಾಣಿಜ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿ ಸಾಧಿಸುವಲ್ಲಿ ಮುನ್ನಡೆಯಬೇಕಿದೆ. ಆ ನಿಟ್ಟಿನಲ್ಲಿ ಅಭಿವೃದ್ಧಿಗೆ ಪೂರಕವಾಗಿ ಮಾಹಿತಿ ನೀಡುವಂತಾಗಬೇಕು ಎಂದು ಅವರು ಸಲಹೆ ಮಾಡಿದರು. ಪ್ರಾದೇಶಿಕ ಅಸಮತೋಲನ ಹೋಗಲಾಡಿಸಿ ಸಮಾಜದಲ್ಲಿ ಶಿಕ್ಷಣ, ಆರೋಗ್ಯ ಸೇರಿದಂತೆ ಇತರೆ ಕ್ಷೇತ್ರಗಳಲ್ಲಿಯೂ ಮುನ್ನಡೆ ಸಾಧಿಸುವಲ್ಲಿ ಶ್ರಮಿಸಬೇಕಿದೆ ಎಂದು ಜಿ.ಪಂ.ಸಿಇಒ ಅವರು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಾಘವ ಅವರು ಆರ್ಥಿಕ ಮತ್ತು ಸಾಮಾಜಿಕವಾಗಿ ಅಭಿವೃದ್ಧಿಯತ್ತ ಮುನ್ನಡೆಯಬೇಕು. ಆ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕು. ಜೊತೆಗೆ ಪ್ರತಿಯೊಬ್ಬರಿಗೂ ಉದ್ಯೋಗ ದೊರೆತಲ್ಲಿ ಮತ್ತಷ್ಟು ಪ್ರಗತಿ ಸಾಧಿಸಬಹುದು ಎಂದು ಹೇಳಿದರು.
ಆರ್.ಸಿ.ಎಚ್ ಅಧಿಕಾರಿ ಡಾ.ಮಧುಸೂದನ್ ಅವರು ಮಾತನಾಡಿ ಹಾಡಿಗಳು ಹಾಗೂ ಲೈನ್ಮನೆಗಳಲ್ಲಿ ಆರೋಗ್ಯಕ್ಕೆ ಹೆಚ್ಚಿನ ಗಮನಹರಿಸಬೇಕು. ಆರೋಗ್ಯಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಹಲವು ಸೌಲಭ್ಯಗಳಿದ್ದು, ಅವುಗಳನ್ನು ಸದ್ಭಳಕೆ ಮಾಡಿಕೊಳ್ಳುವಂತಾಗಬೇಕು ಎಂದು ಸಲಹೆ ಮಾಡಿದರು.
ರೋಟರಿ ಸಂಸ್ಥೆಯ ನಿರ್ದೇಶಕರಾದ ಎಚ್.ಟಿ.ಅನಿಲ್ ಅವರು ಮಾತನಾಡಿ ಜಿಲ್ಲೆಯಲ್ಲಿ ಕಾರ್ಮಿಕರ ಪ್ರಮಾಣದಲ್ಲಿ ಅಸಮತೋಲನ ಕಂಡುಬಂದಿದೆ. ಸ್ಥಳೀಯ ಕಾರ್ಮಿಕರಿಗಿಂತ ಹೆಚ್ಚಾಗಿ ವಲಸೆ ಕಾರ್ಮಿಕರಿದ್ದಾರೆ. ಕಳೆದ 2 ವರ್ಷಗಳಲ್ಲಿ ಕೊಡಗಿಗೆ 1 ಲಕ್ಷಕ್ಕೂ ಅಧಿಕ ಕಾರ್ಮಿಕರು ಹೊರ ರಾಜ್ಯಗಳಿಂದ ಬಂದಿದ್ದಾರೆ. ಈ ಪ್ರಮಾಣ ಮುಂದೊಂದು ದಿನ ಕೊಡಗಿಗೇ ಸಮಸ್ಯೆ ತರುವ ಎಲ್ಲಾ ಸಾಧ್ಯತೆಗಳಿದೆ. ಸ್ಥಳೀಯ ಕಾರ್ಮಿಕರಿಗೆ ಜಿಲ್ಲೆಯಲ್ಲಿಯೇ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕುಶಾಲನಗರ, ಗೋಣಿಕೊಪ್ಪ, ಸೋಮವಾರಪೇಟೆಯಂತಹ ಪ್ರದೇಶಗಳಲ್ಲಿ ಸೂಕ್ತ ಉದ್ಯಮಗಳ ಸ್ಥಾಪನೆ ಮೂಲಕ ಕ್ರಮ ಕೈಗೊಳ್ಳಬೇಕೆಂದು ಸಲಹೆ ಮಾಡಿದರು.
ಜಿಲ್ಲೆಯಲ್ಲಿ ಪರಿಸರಕ್ಕೆ ಪೂರಕವಾದ ವಿವಿಧ ಉದ್ಯಮಗಳಿಗೆ ಉತ್ತೇಜನ ನೀಡಿದ್ದೇ ಆದಲ್ಲಿ ಕೊಡಗಿನ ಯುವಜನಾಂಗ ಉದ್ಯೋಗ ಅರಸಿ ಹೊರ ಜಿಲ್ಲೆಗಳಿಗೆ ತೆರಳುವುದು ತಪ್ಪುತ್ತದೆ. ಸರ್ಕಾರದ ವಿವಿಧ ಯೋಜನೆಗಳನ್ನು ಬಳಸಿಕೊಂಡು ಜಿಲ್ಲೆಯಲ್ಲಿಯೇ ಹೊಸ ಉದ್ಯಮಗಳನ್ನು ಪ್ರಾರಂಭಿಸಲೂ ಉತ್ತೇಜನ ಕೊಡಬೇಕು. ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನೇದಿನೇ ಹೆಚ್ಚಾಗುತ್ತಿದೆ. ಇದನ್ನು ಪರಿಹರಿಸುವಂತಾಗಬೇಕು ಎಂದು ಕೋರಿದರು.
ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ನಾಗೇಂದ್ರ ಪ್ರಸಾದ್ ಅವರು ಮಾತನಾಡಿ ಕೊಡಗು ಜಿಲ್ಲೆ ಕಾಫಿ ಮತ್ತು ಪ್ರವಾಸೋದ್ಯಮಕ್ಕೆ ಹೆಸರಾಗಿದ್ದು, ಇದರ ಜೊತೆಗೆ ಗಾರ್ಮೆಂಟ್ಸ್ ಸೇರಿದಂತೆ ವಿವಿಧ ಉದ್ಯಮಗಳನ್ನು ತೆರೆಯುವಂತಾಗಬೇಕು ಎಂದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಚಂದ್ರಶೇಖರ್ ಅವರು ಮಾಹಿತಿ ನೀಡಿ ವರ್ಷದಿಂದ ವರ್ಷಕ್ಕೆ ಭತ್ತ ಬೆಳೆಯುವ ಪ್ರದೇಶ ಕಡಿಮೆಯಾಗಿದೆ. ಆದ್ದರಿಂದ ಭತ್ತ ಬೆಳೆಯುವವರಿಗೆ ಪ್ರೋತ್ಸಾಹಧನ (ಇನ್ಸೆಂಟಿವ್) ನೀಡುವಂತಾಗಬೇಕು ಎಂದು ಕೋರಿದರು.
ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ರಂಗಧಾಮಪ್ಪ ಅವರು ಮಾತನಾಡಿ ಅಭಿವೃದ್ಧಿ ಸೂಚ್ಯಂಕದಲ್ಲಿ ಸಾಕ್ಷರತೆ ಅತೀ ಮುಖ್ಯವಾಗಿದೆ. ಪ್ರತಿಯೊಬ್ಬರೂ ಅಕ್ಷರ ಕಲಿತಲ್ಲಿ ಅಭಿವೃದ್ಧಿ/ಪ್ರಗತಿ ಹೊಂದಲು ಸಾಧ್ಯ. ಆ ನಿಟ್ಟಿನಲ್ಲಿ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಪ್ರತ್ಯೇಕವಾಗಿ ಮುಖ್ಯೋಪಾಧ್ಯಾಯರನ್ನು ನೇಮಿಸುವಂತಾಗಬೇಕು ಎಂದು ಸಲಹೆ ಮಾಡಿದರು.
ವಿವಿಧ ಇಲಾಖೆಗಳಲ್ಲಿ ವಸತಿ ಶಾಲೆಗಳು ಕಾರ್ಯ ನಿರ್ವಹಿಸುತ್ತಿದ್ದು, ಒಂದೇ ಇಲಾಖೆಗೆ ಸೇರ್ಪಡೆ ಮಾಡಿ ಶಾಲೆ ಮತ್ತು ವಸತಿ ಶಾಲೆಗಳು ಒಟ್ಟಿಗೆ ಇದ್ದಲ್ಲಿ ಅಭಿವೃದ್ಧಿ ಕಾಣಬಹುದು. ಇದರಿಂದ ಸರ್ಕಾರಕ್ಕೂ ಸಹ ಹೊರೆ ಕಡಿಮೆಯಾಗಲಿದೆ ಎಂದು ರಂಗಧಾಮಪ್ಪ ಅವರು ಸಲಹೆ ಮಾಡಿದರು.
ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಬಸ್ ಸೇವೆ ಕಲ್ಪಿಸಬೇಕು. ಕೇರಳ ಮಾದರಿಯಲ್ಲಿ ಶಿಕ್ಷಕರನ್ನು ನಿಯೋಜಿಸಬೇಕು ಎಂದು ರಂಗಧಾಮಪ್ಪ ಕೋರಿದರು.ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಅಧಿಕಾರಿ ಎಸ್.ಹೊನ್ನೇಗೌಡ ಅವರು ಮಾತನಾಡಿ ಆದಿವಾಸಿಗಳು, ಹಾಡಿಯ ಜನರ ಅಭಿವೃದ್ಧಿ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತಾಗಬೇಕು. ವಸತಿ ಶಾಲೆಯ ಶಿಕ್ಷಕರಿಗೆ ವಸತಿ ಗೃಹ ಕಲ್ಪಿಸುವಂತಾಗಬೇಕು ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಅವರು ಮಾತನಾಡಿ ರಾಜ್ಯದಲ್ಲಿ ಏಕರೂಪ ಶಿಕ್ಷಣ ಪದ್ಧತಿ ಜಾರಿಯಾಗಬೇಕು. ಪ್ರತೀ ಶಾಲೆಯಲ್ಲಿ ವಸತಿ ಸಹಿತ ಶಾಲೆ ಆರಂಭಿಸಬೇಕು ಎಂದು ಸಲಹೆ ಮಾಡಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ದಿಲನ್ ಮುತ್ತಣ್ಣ ಅವರು ಮಾತನಾಡಿ ಇತ್ತೀಚಿನ ದಿನಗಳಲ್ಲಿ ವಸತಿ ಶಾಲೆಗಳಿಗೆ ಬೇಡಿಕೆ ಹೆಚ್ಚಾಗಿದ್ದು, ವಸತಿ ಶಾಲೆಗಳ ಬಲವರ್ಧನೆಗೆ ಶ್ರಮಿಸಬೇಕಿದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜು ಅವರು ಮಾತನಾಡಿ ಹಾಡಿ ಜನರು ವಾಸಿಸುವ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಅಂಗನವಾಡಿ ನಿರ್ಮಾಣಕ್ಕೆ ಅವಕಾಶ ಮಾಡುವಂತಾಗಬೇಕು. ಲೈನ್ಮನೆಗಳಲ್ಲಿ ಇರುವವರಿಗೆ ಆಧಾರ್ ಕಾರ್ಡ್ ಮಾಡಿಸಬೇಕು. ಆಧಾರ್ ಕಾರ್ಡ್ ಇಲ್ಲದೆ ಗೃಹಲಕ್ಷ್ಮಿ ತಲುಪಿಸಲು ಸಾಧ್ಯವಾಗುತ್ತಿಲ್ಲ. ಬಾಲ್ಯ ವಿವಾಹ ಹಾಗೂ ಪೋಕ್ಸೋ ಪ್ರಕರಣ ತಡೆಯಲು ಹೆಚ್ಚಿನ ಶ್ರಮವಹಿಸಲಾಗಿದೆ ಎಂದರು.
ಕೊಡಗು ಜಿಲ್ಲೆಯಲ್ಲಿ ಸರ್ಕಾರಿ ನೌಕರರು ಕೆಲಸ ಮಾಡಲು ಹಿಂಜರಿಯುತ್ತಾರೆ. ಆದ್ದರಿಂದ ಈ ಹಿಂದಿನಂತೆ ‘ಗಿರಿಭತ್ಯೆ’ ನೀಡುವಂತಾಗಬೇಕು ಎಂದು ಇದೇ ಸಂದರ್ಭದಲ್ಲಿ ಕೋರಿದರು. ತಿತಿಮತಿ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಮಂಗಳ ಅವರು ಮಾತನಾಡಿ ಶಾಲೆಯಲ್ಲಿ 178 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, 120 ವಿದ್ಯಾರ್ಥಿಗಳಿಗೆ ಆಧಾರ್ ಕಾರ್ಡ್ ಇದೆ. ಉಳಿದವರಿಗೆ ಆಧಾರ್ ಕಾರ್ಡ್ ಇಲ್ಲದೆ ತೊಂದರೆಯಾಗಿದೆ ಎಂದರು.
ಹೋಟೆಲ್ ಹಾಗೂ ರೆಸಾರ್ಟ್ ಅಸೋಸಿಯೇಷನ್ ಉಪಾಧ್ಯಕ್ಷರಾದ ಮಂಜುನಾಥ್ ಅವರು ಮಾತನಾಡಿ ಆಡಳಿತದಲ್ಲಿ ವಿಕೇಂದ್ರೀಕರಣ ಇದ್ದಾಗ ಪ್ರಗತಿ ಸಾಧಿಸಲು ಸಾಧ್ಯ. ಆ ನಿಟ್ಟಿನಲ್ಲಿ ವಿಕೇಂದ್ರೀಕರಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದರು. ಜಿ.ಪಂ.ಉಪ ಕಾರ್ಯದರ್ಶಿ ಅಬ್ದುಲ್ ನಬಿ, ಜಿ.ಪಂ.ಯೋಜನಾ ನಿರ್ದೇಶಕರಾದ ಜೀವನ್ ಕುಮಾರ್, ಬಿಸಿಎಂ ಇಲಾಖೆ ಅಧಿಕಾರಿ ಪಿ.ಪಿ.ಕವಿತಾ, ವಿಕಲಚೇತನರ ಅಧಿಕಾರಿ ವಿಮಲ, ನವೀನ್, ಪವನ್ ಕುಮಾರ್, ಇತರರು ಇದ್ದರು.