ಮಡಿಕೇರಿ: ಮಡಿಕೇರಿ ತಾಲ್ಲೂಕಿನ ಅರೆಕಾಡು ಹೊಸ್ಕೇರಿ ರಸ್ತೆಯ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ (Dr.Mantar Gowda) ಅವರು ಭೂಮಿಪೂಜೆ ನೆರವೇರಿಸಿದರು.ಕಳೆದ ಕೆಲವು ವರ್ಷಗಳಿಂದ ಹದಗೆಟ್ಟಿದ್ದ ರಸ್ತೆಯಲ್ಲಿ ವಾಹನಗಳ ಸಂಚಾರ ಅಸಾಧ್ಯವಾಗಿತ್ತು. ಹೊಂಡ, ಗುಂಡಿಗಳಿAದ ಕೂಡಿದ್ದ ರಸ್ತೆಯ ಅಭಿವೃದ್ಧಿಗಾಗಿ ಇತ್ತೀಚೆಗೆ “ಕೊಡವ ವೆಲ್ಫೇರ್ ಐಂಡ್ ರಿಕ್ರಿಯೇಷನ್ ಅಸೋಸಿಯೇಷನ್” ಹಾಗೂ ಗ್ರಾಮಸ್ಥರು ಶಾಸಕರಿಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿದ ಶಾಸಕರು ಅನುದಾನವನ್ನು ಮೀಸಲಿಟ್ಟು ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದರು.
ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಡಾ.ಮಂತರ್ ಗೌಡ ಅವರು ಗ್ರಾಮದ ಯಾವುದೇ ಸಮಸ್ಯೆಗಳಿದ್ದಲ್ಲಿ ಸ್ಪಂದಿಸುವುದಾಗಿ ಭರವಸೆ ನೀಡಿದರು.ರಸ್ತೆ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿದೆ, ಈ ಬಗ್ಗೆ ಗ್ರಾಮಸ್ಥರು ಕೂಡ ಗಮನ ಹರಿಸಬೇಕೆಂದರು.
ಇದೇ ಸಂದರ್ಭ ಅರೆಕಾಡು – ಭಗವತಿ ದೇವಾಲಯ ಮತ್ತು ಕುಕ್ಕೇರ ಐನ್ ಮನೆ ರಸ್ತೆಯ ಅಭಿವೃದ್ಧಿಗೂ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೊಡವ ವೆಲ್ಫೇರ್ ಐಂಡ್ ರಿಕ್ರಿಯೇಷನ್ ಅಸೋಸಿಯೇಷನ್ ನ ಅಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ ಅವರು ಶಾಸಕರಿಗೆ ಮನವಿ ಪತ್ರ ಸಲ್ಲಿಸಿದರು. ಅದೇ ರೀತಿ ಅರೆಕಾಡು ಅಭ್ಯತ್ ಮಂಗಲ ಗ್ರಾಮದ ವರೆಗಿನ ರಸ್ತೆಯನ್ನು ತ್ವರಿತವಾಗಿ ಅಭಿವೃದ್ಧಿ ಪಡಿಸಿದ ಶಾಸಕರಿಗೆ ಧನ್ಯವಾದ ಅರ್ಪಿಸಿದರು.