ಸೋಮವಾರಪೇಟೆ ತಹಸೀಲ್ದಾರ್‌ ಕಚೇರಿಗೆ ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಭೇಟಿ – ಮಳೆಗಾಲದ ಪರಿಸ್ಥಿತಿ ಎದುರಿಸಲು ಸಜ್ಜಾಗಿರುವಂತೆ ಸೂಚನೆ..!

Share this post :

ಸೋಮವಾರಪೇಟೆ : ತಹಶೀಲ್ದಾರರ ಕಚೇರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಗುರುವಾರ ಭೇಟಿ ನೀಡಿ ಭೂಸುರಕ್ಷತೆ ಮತ್ತು ಕಂದಾಯ ದಾಖಲೆ ಡಿಜಿಟಲೀಕರಣ ಪ್ರಕ್ರಿಯೆ ಸಂಬಂಧ ಮಾಹಿತಿ ಪಡೆದರು.
ಭೂ ಸುರಕ್ಷತಾ ಯೋಜನೆಯಡಿ ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ವಿತರಿಸುವ ಹಿನ್ನೆಲೆ ಅಗತ್ಯ ಕ್ರಮವಹಿಸುವಂತೆ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು. ಸರ್ಕಾರ ಕಂದಾಯ ಇಲಾಖೆಯಲ್ಲಿ ಭೂದಾಖಲೆಗಳಿಗೆ ಸಂಬಂಧಿಸಿದಂತೆ ಸಾಕಷ್ಟು ಸುಧಾರಣೆ ಮತ್ತು ಬದಲಾವಣೆ ಜಾರಿಗೊಳಿಸಿದ್ದು, ಅವುಗಳನ್ನು ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು. ಸಕಾಲ ಯೋಜನೆ, ಪಿಂಚಣಿ ಯೋಜನೆ ಸಂಬಂಧಿಸಿದಂತೆ ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅವರು ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಕೃಷ್ಣಮೂರ್ತಿ, ಉಪ ತಹಶೀಲ್ದಾರರು, ಕಂದಾಯ ನಿರೀಕ್ಷಕರು ಇತರರು ಇದ್ದರು.
ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಸಭೆ: ಸೋಮವಾರಪೇಟೆ ತಾಲ್ಲೂಕಿಗೆ ಸಂಬಂಧಿಸಿದಂತೆ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಇದೇ ಸಂದರ್ಭದಲ್ಲಿ ಸಭೆ ನಡೆಸಿದರು.
ಈ ಬಾರಿ ಮುಂಗಾರು ಬೇಗ ಆರಂಭವಾಗಿದ್ದು, ಮೇ ಮತ್ತು ಜೂನ್ ತಿಂಗಳಲ್ಲಿಯೇ ಹೆಚ್ಚಿನ ಮಳೆಯಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಎಲ್ಲಾ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ನಿರ್ದೇಶನ ನೀಡಿದರು.
ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಜಿ.ಪಂ. ಉಪ ಕಾರ್ಯದರ್ಶಿ ಅಬ್ದುಲ್ ನಬಿ, ತಹಶೀಲ್ದಾರ್ ಕೃಷ್ಣಮೂರ್ತಿ, ತಾ.ಪಂ.ಇಒ ಪರಮೇಶ ಇತರರು ಇದ್ದರು.