ರಸ್ತೆ ಸಮಸ್ಯೆಯಿಂದ ಅಪಘಾತ ಸಂಭವಿಸಿದರೆ ಅಧಿಕಾರಿಗಳ ವಿರುದ್ಧ ಸುಮೊಟೋ ಪ್ರಕರಣ – ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಎಚ್ಚರಿಕೆ

Share this post :

ಮಡಿಕೇರಿ : ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ರಸ್ತೆಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ‘ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಗತ್ಯವಿರುವ ಕಡೆಗಳಲ್ಲಿ ವೇಗ ನಿಯಂತ್ರಣ ಸಂಬಂಧ ಹಂಪ್‌ಗಳನ್ನು ಅಳವಡಿಸುವುದು. ಜೊತೆಗೆ ಎದ್ದು ಕಾಣುವಂತೆ ಬಿಳಿ ಪಟ್ಟೆ ಬರೆಯುವುದು. ರಸ್ತೆ ಬದಿ ಗಿಡಗಂಟಿಗಳನ್ನು ಕಡಿಯುವುದು, ರಸ್ತೆ ತಿರುವು, ಉಬ್ಬು ರಸ್ತೆ ಮತ್ತಿತರ ಬಗ್ಗೆ ಸೂಚನಾ ಫಲಕ ಅಳವಡಿಸಿ, ರಸ್ತೆ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವಂತೆ ಇಂಜಿನಿಯರ್‌ಗಳಿಗೆ ತಾಕೀತು ಮಾಡಿದರು.
ಚಾಲಕರಿಗೆ ರಸ್ತೆಗೆ ಸಂಬಂಧಿಸಿದಂತೆ ಮಾಹಿತಿ ದೊರೆಯುವಂತಾಗಬೇಕು. ಇದರಿಂದ ವೇಗ ನಿಯಂತ್ರಣಕ್ಕೆ ಸಹಕಾರಿಯಾಗಿ ಅಪಘಾತ ತಡೆಯಬಹುದಾಗಿದೆ. ಆ ನಿಟ್ಟಿನಲ್ಲಿ ತುರ್ತು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು.
ಕುಶಾಲನಗರದಿಂದ ಸಂಪಾಜೆ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಹಲವು ಅಪಘಾತಗಳು ಸಂಭವಿಸುತ್ತಿದ್ದು, ಅಪಘಾತ ನಿಯಂತ್ರಣಕ್ಕೆ ಕ್ರಮವಹಿಸಬೇಕು. ಕೊಯನಾಡು ಬಳಿ ಇತ್ತೀಚೆಗೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಪದೇ ಪದೇ ಹೆದ್ದಾರಿಯಲ್ಲಿ ಅಪಘಾತ ಸಂಭವಿಸುತ್ತಿದೆ. ಈ ಬಗ್ಗೆ ಸೂಚನಾ ಫಲಕಗಳನ್ನು ಅಳವಡಿಸಬೇಕು ಎಂದರು.
ವಿರಾಜಪೇಟೆ-ಗೋಣಿಕೊಪ್ಪ ಮಾರ್ಗದ ಹಾತೂರು ಜಂಕ್ಷನ್ ಬಳಿ ಸೂಚನಾ ಫಲಕ ಅಳವಡಿಸಬೇಕು. ಜೊತೆಗೆ ರಸ್ತೆ ಹಂಪ್‌ಗಳನ್ನು ಅಳವಡಿಸಬೇಕು. ವೇಗವಾಗಿ ವಾಹನ ಚಲಾಯಿಸುವುದರಿಂದ ಅಪಘಾತಗಳು ಹೆಚ್ಚಾಗಲಿವೆ. ಈ ಸಂಬಂಧ ಗಮನಹರಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ರಾಷ್ಟಿçÃಯ ಹೆದ್ದಾರಿ, ಲೋಕೋಪಯೋಗಿ, ಪಂಚಾಯತ್ ಇಲಾಖೆ ವ್ಯಾಪ್ತಿಯ ರಸ್ತೆಗಳನ್ನು ಸರಿಯಾಗಿ ನಿರ್ವಹಣೆ ಮಾಡದೆ ಅಪಘಾತಗಳು ಸಂಭವಿಸಿದ್ದಲ್ಲಿ ತಮ್ಮ ಮೇಲೆ ಸುಮೋಟೋ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ಎಚ್ಚರಿಸಿದರು.
ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್ ಮಾತನಾಡಿ, ರಸ್ತೆ ಸುರಕ್ಷತೆ ಸಂಬಂಧಿಸಿದಂತೆ ಎಲ್ಲೆಲ್ಲಿ ಹಂಪ್‌ಗಳನ್ನು ಅಳವಡಿಸಬೇಕು. ಬಿಳಿ ಬಣ್ಣ ಬಳಿಯಬೇಕು ಎಂಬ ಬಗ್ಗೆ, ಹೆಚ್ಚಿನ ಅಫಘಾತ ಸಂಭವಿಸುವ ಸ್ಥಳದ ಬಗ್ಗೆ ಎರಡು ಮೂರು ದಿನದಲ್ಲಿ ಪಟ್ಟಿ ನೀಡಲಾಗುವುದು ಎಂದು ತಿಳಿಸಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್, ಪೌರಾಯುಕ್ತ ಎಚ್.ಆರ್.ರಮೇಶ್, ಕೆಎಸ್‌ಆರ್‌ಟಿಸಿ ಮಡಿಕೇರಿ ಘಟಕದ ಸಹಾಯಕ ಸಂಚಾರ ಅಧೀಕ್ಷಕ ಎ.ಈರಪ್ಪ ಇತರರು ಇದ್ದರು.

coorg buzz
coorg buzz