ಪೊನ್ನಂಪೇಟೆ : ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್.ಎ.) ವತಿಯಿಂದ ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್. ಅರುಣ್ ಮಾಚಯ್ಯ ಅವರನ್ನು ಭೇಟಿ ಮಾಡಲಾಯಿತು. ಅಧ್ಯಕ್ಷ ಆಲೀರ ರಶೀದ್ ನೇತೃತ್ವದ ನಿಯೋಗ ಗೋಣಿಕೊಪ್ಪಲಿನ ಕಿತ್ತಳೆ ಬೆಳೆಗಾರರ ಸಹಕಾರ ಸಂಘದ ಸಭಾಂಗಣದಲ್ಲಿ ಅರುಣ್ ಮಾಚಯ್ಯ ಅವರನ್ನು ಭೇಟಿ ಮಾಡಿ ಅಭಿನಂದಿಸಿ ಮನವಿ ಸಲ್ಲಿಸಿತು. ಜೊತೆಗೆ ಸಂಸ್ಥೆಯ ಕ್ರೀಡಾ ಚಟುವಟಿಕೆಗಳ ಬಗ್ಗೆ ಮಾರ್ಗದರ್ಶನ ಪಡೆಯಿತು.
ಕೆ.ಎಂ.ಎಸ್.ಎ. ಅಧ್ಯಕ್ಷ ರಶೀದ್ ಮಾತನಾಡಿ, ಸಂಸ್ಥೆ ಕ್ರೀಡಾ ಚಟುವಟಿಕೆಗಳ ಆಯೋಜನೆಗಿಂತ ಅವಕಾಶ ವಂಚಿತ ಕ್ರೀಡಾಪಟುಗಳಿಗೆ ಸೂಕ್ತ ವೇದಿಕೆ ಸೃಷ್ಟಿಸಲು ಮೊದಲ ಆದ್ಯತೆ ನೀಡುತ್ತದೆ. ಸಂಸ್ಥೆಯ ಈ ಉದ್ದೇಶಕ್ಕೆ ಸರಕಾರದ ನೆರವು ಅಗತ್ಯವಿದ್ದು, ಈ ನಿಟ್ಟಿನಲ್ಲಿ ಸಹಕಾರ ನೀಡಬೇಕು ಎಂದು ಅರುಣ್ ಮಾಚಯ್ಯ ಅವರಲ್ಲಿ ಮನವಿ ಮಾಡಿದರು.
ಅರುಣ್ ಮಾಚಯ್ಯ ಪ್ರತಿಕ್ರಿಯಿಸಿ, ಕೆ.ಎಂ.ಎಸ್.ಎ.ನ ಎಲ್ಲಾ ಕಾರ್ಯ ಚಟುವಟಿಕೆಗಳಿಗೆ ಪೂರ್ಣ ಸಹಕಾರ ನೀಡಲಾಗುವುದು. ಯುವಕರಿಗೆ ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಇದೀಗ ಕ್ರೀಡಾ ಕ್ಷೇತ್ರದಲ್ಲಿ ಸಾಕಷ್ಟು ಉತ್ತಮ ಅವಕಾಶಗಳಿವೆ. ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಲ್ಲಿ ಯುವ ಕ್ರೀಡಾಪಟುಗಳಿಗೆ ಸೂಕ್ತ ಮಾರ್ಗದರ್ಶನದ ಅಗತ್ಯವಿದೆ. ಈ ಕಾರ್ಯವನ್ನು ಕೆ.ಎಂ.ಎಸ್.ಎ. ವೈಜ್ಞಾನಿಕ ನೆಲೆಗಟ್ಟಿನಲ್ಲಿ ಚಿಂತಿಸಿ ಕಾರ್ಯರೂಪಕ್ಕೆ ತರುವಂತಾಗಬೇಕು ಎಂದು ಸಲಹೆ ನೀಡಿದರು.
ಉಪಾಧ್ಯಕ್ಷರಾದ ಕೇಂಗೋಟಂಡ ಎಸ್. ಸೂಫಿ, ಕುಂಡಂಡ ಎ. ರಜ್ಹಾಕ್, ಕೋಶಾಧಿಕಾರಿ ಆಲೀರ ಎ. ಅಬ್ದುಲ್ ಅಜ್ಹೀಜ್ಹ್, ನಿರ್ದೇಶಕರಾದ ಆಲೀರ ಹುಸೈನ್, ಅಕ್ಕಳತಂಡ ಎ. ಶಫೀಕ್ ಇದ್ದರು.



