ಬೆಂಗಳೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS) ಶತಮಾನದ ಸಂಭ್ರಮದಲ್ಲಿದೆ. ಈ ನಡುವೆ ಸರ್ಕಾರಿ ಸ್ಥಳಗಳಲ್ಲಿ ಆರ್ಎಸ್ಎಸ್ ನಡೆಸುವ ಎಲ್ಲಾ ರೀತಿಯ ಚಟುವಟಿಕೆಗಳ ಮೇಲೆ ನಿಷೇಧ ಹೇರಬೇಕೆಂದು ರಾಜ್ಯದ ಪ್ರಭಾವಿ ಸಚಿವರೊಬ್ಬರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ. ಈ ಸಂಬಂಧಿತವಾಗಿ ಸಿಎಂಗೆ ಪತ್ರವನ್ನೂ ಬರೆದಿದ್ದಾರೆ.
ಆರ್ಎಸ್ಎಸ್ ಚಟುವಟಿಕೆಗಳಿಗೆ ನಿರ್ಬಂಧ ಹೇರಬೇಕೆಂದು ಆಗ್ರಹಿಸಿರುವುದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ. ಅವರು ಬರೆದಿರುವ ಪತ್ರದಲ್ಲಿನ ಅಂಶಗಳು ಇಂತಿವೆ. ಆರ್ಎಸ್ಎಸ್ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳು, ಸರ್ಕಾರಿ ಮೈದಾನಗಳನ್ನು ಬಳಸಿಕೊಂಡು ಶಾಖೆ ನಡೆಸುತ್ತಿದೆ. ಯುವ ಸಮೂಹದ ಮನಸ್ಸಿನಲ್ಲಿ ಭಾರತದ ಏಕತೆಯ ವಿರುದ್ಧವಾಗಿ ಹಾಗೂ ಸಂವಿಧಾನದ ಆಶಯದ ವಿರುದ್ಧವಾಗಿ ನಕಾರಾತ್ಮಕ ಆಲೋಚನೆಗಳನ್ನು ತುಂಬಲಾಗುತ್ತಿದೆ. ಪೊಲೀಸ್ ಅನುಮತಿ ಇಲ್ಲದೆ ದೊಣ್ಣೆಗಳನ್ನು ಹಿಡಿದು ಆಕ್ರಮಣಕಾರಿ ಪ್ರದರ್ಶನ ನಡೆಸುವ ಮೂಲಕ ಮುಗ್ಧ ಮಕ್ಕಳು, ಯುವಜನರ ಮೇಲೆ ದುಷ್ಪರಿಣಾಮ ಬೀರಲಾಗುತ್ತಿದೆ. ಹೀಗಾಗಿ ಸರ್ಕಾರಿ ಸ್ಥಳಗಳಲ್ಲಿ ಆರ್ಎಸ್ಎಸ್ ನಡೆಸುವ ಎಲ್ಲಾ ಚಟುವಟಿಕೆಗಳಿಗೆ ನಿಷೇಧ ಹೇರಬೇಕೆಂದು ಆಗ್ರಹಿಸುತ್ತಿದ್ದೇನೆ ಅಂತ ಪತ್ರದಲ್ಲಿ ಬರೆದಿದ್ದಾರೆ.




