ಗೋಣಿಕೊಪ್ಪ : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನವೆಂಬರ್ 2 ಮತ್ತು 3 ರಂದು ಮಡಿಕೇರಿಯಲ್ಲಿ ಆಯೋಜಿಸಿರುವ ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್ ಟೂರ್ನಿಯ ಲಾಂಛನವನ್ನು ರಿಪಬ್ಲಿಕ್ ನೆಟ್ವರ್ಕ್ ಅಧ್ಯಕ್ಷ ಚೇರಂಡ ಕಿಶನ್ ಮಾದಪ್ಪ ಬಿಡುಗಡೆಗೊಳಿಸಿದರು.
ಪೊನ್ನಂಪೇಟೆಯ ಖಾಸಗಿ ಕ್ಲಬ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಗೋ ಅನಾವರಣಗೊಳಿಸಿ ಮಾತನಾಡಿದ ಅವರು, ಕೊಡಗಿನ ಪತ್ರಕರ್ತರು ಸಾಕಷ್ಟು ಕ್ರೀಡಾಕೂಟ ಆಯೋಜಿಸಿಕೊಂಡು ಸಂಘಟಿತಗೊಳ್ಳುತ್ತಿರುವುದು ಮೆಚ್ಚುವ ವಿಚಾರ. ಹಿಂದೆಯೂ ಕೂಡ ಸಾಕಷ್ಟು ಕ್ರೀಡಾಕೂಟಗಳು ನಡೆದಿರುವ ಬಗ್ಗೆ ಮಾಹಿತಿ ಇದೆ. ರಾಜ್ಯಮಟ್ಟದ ಕ್ರಿಕೆಟ್ ಮೂಲಕ ಮತ್ತೆ ಕ್ರೀಡಾ ಚಟುವಟಿಕೆಗೆ ತೋರುತ್ತಿರುವ ಉತ್ಸಾಹ ಮಾದರಿಯಾಗಿದೆ. ಕ್ರೀಡಾಕೂಟಕ್ಕೆ ಅಗತ್ಯ ನೆರವು ನೀಡುವ ಮೂಲಕ ಪ್ರೋತ್ಸಾಹಿಸಲಾಗುವುದು ಎಂದು ಹೇಳಿದರು.
ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ಮಾತನಾಡಿ, ರಾಜ್ಯದ ವಿವಿಧ ಜಿಲ್ಲಾ ತಂಡಗಳನ್ನು ಸೇರಿಸಿಕೊಂಡು ಕ್ರಿಕೆಟ್ ಟೂರ್ನಿ ನಡೆಸಲು ಯೋಜನೆ ರೂಪಿಸಲಾಗಿದೆ. ಅಗತ್ಯ ಸಿದ್ದತೆ ನಡೆದಿದೆ. ಸುಮಾರು 20 ಕ್ಕೂ ಹೆಚ್ಚು ಪತ್ರಕರ್ತರನ್ನು ಒಳಗೊಂಡ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಎಲ್ಲರ ಸಹಕಾರ ಅಗತ್ಯ ಎಂದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಮಾತನಾಡಿ, ಎರಡನೇ ಬಾರಿಗೆ ರಾಜ್ಯಮಟ್ಟದ ಕ್ರಿಕೆಟ್ ಆಯೋಜನೆಯ ಆತಿಥ್ಯವನ್ನು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ವಹಿಸುತ್ತಿರುವುದು ಹೆಮ್ಮೆಯ ವಿಚಾರ. ಬೇರೆ ಜಿಲ್ಲೆಗಳ ತಂಡಗಳಿಗೆ ಕೊಡಗಿನ ಬಗ್ಗೆ ಮತ್ತಷ್ಟು ತಿಳಿಸಲು ಮತ್ತು ಪರಿಸ್ಪರ ಒಗ್ಗಟ್ಟಿಗೆ ಸಹಕಾರಿ ಎಂದರು.
ಸಂಘದ ರಾಷ್ಟ್ರೀಯ ಸಮಿತಿ ಸದಸ್ಯ ಪಳೆಯಂಡ ಪಾರ್ಥ ಚಿಣ್ಣಪ್ಪ, ಸಂಘದ ಕ್ರೀಡಾ ಸಮಿತಿ ಸಂಚಾಲಕ ಸಂತೋಷ್ ರೈ,
ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಣ್ಣುವಂಡ ಕಿಶೋರ್ ನಾಚಪ್ಪ, ವಿರಾಜಪೇಟೆ ತಾಲೂಕು ಅಧ್ಯಕ್ಷ ರೆಜಿತ್ ಕುಮಾರ್ ಗುಹ್ಯ, ಸೋಮವಾರಪೇಟೆ ತಾಲೂಕು ಅಧ್ಯಕ್ಷ ವಿಶ್ವ ಕುಂಬೂರು, ವಿವಿಧೆಡೆಯ ಪತ್ರಕರ್ತರು ಈ ಸಂದರ್ಭ ಇದ್ದರು. ..
ಕಿಶೋರ್ ರೈ ಕತ್ತಲೆಕಾಡು ಕಾರ್ಯಕ್ರಮ ನಿರೂಪಿಸಿದರು. ಸಿಂಗಿ ಸತೀಶ್ ಸ್ವಾಗತಿಸಿದರು. ಸುಬ್ರಮಣಿ ವಂದಿಸಿದರು.



